Thursday, April 17, 2008

ಘಟ್ಟಿ ಕೂತ್ಗೋರಿ....

"ವಿದ್ಯಾಗಿರಿಗೆ ಬರ್ತೀರೇನ್ರಿ?"
"ನೂರು ರುಪಾಯಿ ಆಕ್ಕೇತಿ ನೋಡ್ರಿ"
ನೂರು ರೂಪಾಯಾ? ನಮ್ಮ ಹತ್ತಿರ ಇಪ್ಪತ್ತು ರೂಪಾಯಿಗೆ ಒಂದು ಪೈಸೆಯೂ ಹೆಚ್ಚು ಇರಲಿಲ್ಲ. ರಾತ್ರಿ ಹನ್ನೊಂದುವರೆ ಆಗಿಬಿಟ್ಟಿತ್ತು. ಬಾಗಲ್ಕೋಟ್ ಸಿಟಿಯಿಂದ ವಿದ್ಯಾಗಿರಿಗೆ ಹೋಗುವ ಕೊನೆಯ ಬಸ್ಸು ರಾತ್ರಿ ಹತ್ತು ಗಂಟೆಗಾಗಲೇ ಹೊರಟುಹೋಗಿತ್ತು. ರಾತ್ರಿ ಹೇಗಪ್ಪಾ ಮನೆಮುಟ್ಟುವುದು ಎಂದು ನಮ್ಮ ತಲೆಬಿಸಿ ನಮಗಾದರೆ, "ಅಪ್ಪನ ರೊಕ್ಕ ಕುಡ್ಯಾಕ್ ಖರ್ಚು ಮಾಡಾಕ್ ಬರ್ತೈತಿ... ಆಟೋಕ್ಕೆ ಕೊಡಾಕ್ ಬರಾಂಗಿಲ್ಲಾ?" ಎಂದು ಆ ಆಟೋ ಡ್ರೈವರ್ ಬೇರೆ ರೇಗಿಸುತ್ತಿದ್ದ. ಸಿಟ್ಟು ಬಂದರೂ ಏನೂ ಮಾಡಲಾಗದ ಪರಿಸ್ಥಿತಿ. ಅಲ್ಲಿದ್ದವರು ನಾವಿಬ್ಬರು ಮತ್ತೆ ಆ ಆಟೋಡ್ರೈವರ್ ಅಷ್ಟೇ. ಸುತ್ತಮುತ್ತಲೂ ಒಂದು ನರಪಿಳ್ಳೆಯೂ ಓಡಾಡುತ್ತಿರಲಿಲ್ಲ. ಗುರುಸಿದ್ದೇಶ್ವರ ಚಿತ್ರಮಂದಿರದ ಎದುರಿದ್ದ ಸೋಡಿಯಂ ಲ್ಯಾಂಪೊಂದು ಆವರಿಸಿದ್ದ ಕತ್ತಲನ್ನು ಸ್ವಲ್ಪಮಟ್ಟಿಗೆ ಕಡಿಮೆ ಮಾಡಿತ್ತು. ಅಪರೂಪಕ್ಕೆ ಒಂದೊಂದು ಟ್ರಕ್ಕು ಆ ಮಾರ್ಗವಾಗಿ ಹೋಗುತ್ತಿದ್ದವು. ಎಲ್ಲ ಟ್ರಕ್ಕುಗಳಿಗೂ ಕೈ ಮಾಡಿ ಮಾಡಿ ಕೈಸೋತವೇ ಹೊರತೂ ಯಾವ ಟ್ರಕ್ಕೂ ನಿಲ್ಲಲಿಲ್ಲ.

ಆದಿನ ಸಂಜೆ ನಾಳೆಯ ನಾಟಕದ ಪ್ರದರ್ಶನಕ್ಕಾಗಿ ತಯಾರಿ ನೆಡೆದಿತ್ತು. ನಾಳೆ ಬೆಳಿಗ್ಗೆ ಆರು ಗಂಟೆಗೆ ಬೆಳಗಾವಿಗೆ ನಾಟಕದ ಕಾಂಪಿಟೇಷನ್‌ಗೆ ಹೋಗಬೇಕಿತ್ತು. ಸ್ಟೇಜ್ ಹಿಂದೆ ಹಾಕಲು ನೀಲಿ ಪರದೆ ಅಲ್ಲಿ ಬಹುಶಃ ಸಿಗಲಿಕ್ಕಿಲ್ಲ ಎಂದು ಊಹಿಸಿದ್ದ ನಮ್ಮ ಡೈರೆಕ್ಟರ್ ನನ್ನ ಮತ್ತು ಪವನನನ್ನ ನೀಲಿ ಪರದೆ ಕೇಳಿಕೊಂಡು ತರಲು ಬಾಗಲ್ಕೋಟ್ ಸಿಟಿಯಲ್ಲಿದ್ದ ಅರ್.ಎಸ್.ಎಸ್ ಕಾರ್ಯಾಲಯಕ್ಕೆ ಕಳಿಸಿದ್ದರು. ನೀಲಿ ಪರದೆಯೇನೋ ಸಿಕ್ಕಿತು. ಆದರೆ ಅಲ್ಲಿಯ ಪರಿಚಿತರೊಂದಿಗೆ ಮಾತನಾಡುತ್ತಾ ಹೊತ್ತು ಹೋಗಿದ್ದೇ ಗೊತ್ತಾಗದೆ ನಮ್ಮ ಪವನ ಸಾಹೇಬ್ರು ವಾಪಸ್ ಹೊರಡುವುದನ್ನು ತುಂಬ ತಡಮಾಡಿಬಿಟ್ಟಿದ್ದರು. ವಿದ್ಯಾಗಿರಿಯಿಂದ ಬಾಗಲ್ಕೋಟೆ ಸಿಟಿಯಿರುವುದು ಕನಿಷ್ಟಪಕ್ಷ ಐದಾರು ಕಿಲೋಮೀಟರ್ ದೂರದಲ್ಲಿ. ದಾರಿಮಧ್ಯ ಸಿಮೆಂಟ್ ಫ್ಯಾಕ್ಟರಿ ಬಿಟ್ಟರೆ ಬೇರೆ ಏನೂ ಇಲ್ಲ. ನೆಡೆದುಕೊಂಡು ಹೋಗುವುದಕ್ಕೆ ಅದರಲ್ಲೂ ಮಧ್ಯರಾತ್ರಿಯಲ್ಲಿ, ನಮಗಂತೂ ಧೈರ್ಯವೇ ಇರಲಿಲ್ಲ. ಬಸ್ಟ್ಯಾಂಡಿಗೆ ಬರುವಷ್ಟರಲ್ಲೇ 10:45 ಆಗಿಬಿಟ್ಟಿತ್ತು. ಯಾವುದಾದರೂ ಗಾಡಿ ಸಿಗಬಹುದೇನೋ ಎಂದು ಕಾಯುತ್ತಾ ಒಂದು ಗಂಟೆಯಾದರೂ ಯಾವ ಗಾಡಿಯೂ ನಮ್ಮ ಕೈಹತ್ತಲಿಲ್ಲ. ಉಳಿದಿದ್ದ ಒಂದೇ ಒಂದು ಮಾರ್ಗವೆಂದರೆ ಆ ಆಟೋ ಹತ್ತಿ ಹೋಗುವುದು. ಅವನನ್ನು ಕೇಳಿದರೆ ನೂರು ರೂಪಾಯಿ ಹಾಗೆ ಹೀಗೆ ಅಂದುಬಿಟ್ಟ. ನಾವು ಅಷ್ಟೆಲ್ಲ ಆಗಲ್ಲಪ್ಪಾ ಎಂದಿದ್ದಕ್ಕೆ ಕುಡುಕರು ಗಿಡುಕರು ಎಂದು ನಮ್ಮ ಸ್ವಾಭಿಮಾನ ಬೇರೆ ಕೆರಳಿಸಿಬಿಟ್ಟ. ಏನೇ ಆಗಲಿ ಮತ್ತೆ ಅವನ ಹತ್ತಿರ ಮಾತ್ರ ಹೋಗುವುದು ಬೇಡ ಎಂದು ನಿರ್ಧರಿಸಿಬಿಟ್ಟೆವು.

"ಎಲ್ಲಾ ನಿಮ್ಮಿಂದಾನೇ..." ರಾಗ ಎಳೆದೆ.
"ಲೇ... ಅಪ್ರೂಪಕ್ಕೆ ಸಿಕ್ಯಾರ... ಬಿಟ್ ಬರಾಕ್ ಆಕ್ಕೇತೇನ್ಲೆ?" ಅವರ ಉತ್ತರ. ಮತ್ತೆ ಇಬ್ಬರೂ ಆಕಡೆಯ ರೋಡಿನ ತುದಿಗೆ ನೋಡಲು ಪ್ರಾರಂಭಿಸಿದೆವು. ಯಾವ ಗಾಡಿಯ ಸುಳಿವೂ ಇಲ್ಲ. ರಾತ್ರಿ ಹೋಗಿ ಇನ್ನೊಂದಿಷ್ಟು ಸ್ಟೇಜ್ ತಯಾರಿ ಬೇರೆ ಮಾಡಬೇಕಿತ್ತು. ಅದು ಹಾಳಾಗಿ ಹೋಗಲಿ, ಹೇಗೋ ಓಟ್ಟಿನಲ್ಲಿ ರೂಮು ತಲುಪಿದರೆ ಸಾಕಾಗಿತ್ತು. ಈ ಸ್ಮಶಾನ ಮೌನದ ನಡುವೆ ಒಂದು ಬೈಕಿನ ಶಬ್ದ ಕೇಳಿಸಿತು. ನಾವಿಬ್ಬರಿದ್ದುದರಿಂದ ಆ ಬೈಕ್‌ಮೇಲಂತೂ ಹೋಗಲಿಕ್ಕಾಗುವುದಿಲ್ಲ ಎಂದು ಸುಮ್ಮನೆ ನಿಂತೆವು. ಆ ಬೈಕ್ ಸವಾರನೋ ಅಂಗಿಯ ಗುಂಡಿಗಳನ್ನು ಅರ್ಧಕ್ಕರ್ಧ ಬಿಚ್ಚಿಕೊಂಡು ಆಕಡೆ ಈಕಡೆ ಒಂದು ಚೂರೂ ನೋಡದೆ ಸಿಕ್ಕಪಟ್ಟೆ ಸ್ಪೀಡಾಗಿ ಓಡಿಸುತ್ತಾ ನಮ್ಮ ಮುಂದೆಯೇ ಹಾದು ಹೋದ. ಮತ್ತೆ ಹತ್ತು ನಿಮಿಷಗಳ ಮೌನ. ಪುನಃ ಮತ್ತೊಂದು ಬೈಕಿನ ಶಬ್ದ ಕೇಳಿಸತೊಡಗಿತು. ಬೈಕ್ ಹತ್ತಿರ ಬಂದಾಗ ನೋಡಿದರೆ, ಹತ್ತು ನಿಮಿಷದ ಹಿಂದೆ ಯಾವ ಬೈಕ್ ನಮ್ಮೆದುರಿಗೆ ಹಾದು ಹೋಗಿತ್ತೋ ಅದೇ ಬೈಕ್. ಆ ಬೈಕ್ ಓಡಿಸುವವ ಮತ್ತದೇ ಪೊಸಿಶನ್‌ನಲ್ಲಿ ಅಂಗಿ ಗುಂಡಿಗಳನ್ನು ಬಿಚ್ಚಿಕೊಂಡು ಮತ್ತದೇ ವೇಗದಲ್ಲಿ ನಮ್ಮೆದುರಿಂದಲೇ ಹಾದುಹೋದ. ನಾವಿಬ್ಬರು ಮುಖ ಮುಖ ನೋಡಿಕೊಂಡೆವು.

ಇನ್ನೇನೂ ಮಾಡಲು ತೋಚದೆ ನಾವಿಬ್ಬರೂ ಗರುಡಗಂಬಗಳಂತೆ ರಸ್ತೆ ಬದಿಯಲ್ಲಿ ನಿಂತಿರುವಾಗ ಪರಿಚಯದವರೊಬ್ಬರು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದರು. ಅವರ ಕೆಲಸ ಅಲ್ಲಿನ ಪ್ರಾದೇಶಿಕ ಪತ್ರಿಕೆಯಲ್ಲಾದುದರಿಂದ ಬಹಳ ಹೊತ್ತು ಇರಬೇಕಾದ ಪರಿಸ್ಥಿತಿಯಿತ್ತು. ಅಂತೂ ಒಬ್ಬರಾದ್ರೂ ಸಿಕ್ರಲ್ಲ ಎಂದುಕೊಂಡು ಹೀಗಾಗಿಬಿಟ್ಟಿದೆ ನಮ್ಮ ಪರಿಸ್ಥಿತಿ ಎಂದು ಹೇಳಿಕೊಂಡೆವು. ಅವರಿಗೆ ಬೆಳಿಗ್ಗೆಯೇ ಅವರ ಗಾಡಿ ಬೇಕಿತ್ತಂತೆ. ಇಲ್ಲದಿದ್ದರೆ ನಿಮ್ಮಿಬ್ಬರಿಗೆ ಕೊಟ್ಟುಬಿಡುತ್ತಿದ್ದೆ. ನೀವು ನಾಳೆ ವಾಪಸ್ ತಂದು ಮುಟ್ಟಿಸಬಹುದಿತ್ತು ಎಂದರು. ಇನ್ನು ಬೇರೆ ಉಪಾಯ ಏನಿದೆ ಎಂದು ಯೋಚಿಸುತ್ತಿರುವಾಗಲೇ ಮತ್ತೆ ಬೈಕಿನ ಶಬ್ದವಾಯಿತು. ಮತ್ತೆ ಅದೇ ಬೈಕ್ ಅದೇ ಸ್ಪೀಡ್‌ನಲ್ಲಿ ಹತ್ತಿರ ಬರುತ್ತಿತ್ತು. ಇವರು "ತಡೀರಿ... ಒಂದ್ ಕೆಲ್ಸಾ ಮಾಡೂನು" ಎಂದನ್ನುತ್ತಾ ಆ ಬೈಕ್‌ನವನಿಗೆ ಕೈ ಮಾಡಿದರು. ಅವನಿದ್ದ ಸ್ಪೀಡಿಗೆ ಅವನು ನಮ್ಮಿಂದ ಅರ್ಧ ಕಿಲೋಮೀಟರ್ ದೂರ ಹೋಗಿ ನಿಂತ. ವಾಪಸ್ಸು ಬಂದು ಅವರಿಗೆ ನಮಸ್ಕಾರಾ ಸಾರ್ ಎಂದ. ಇವರಿಬ್ಬರನ್ನೂ ವಿದ್ಯಾಗಿರಿಗೆ ಬಿಟ್ಟುಕೊಡ್ತೀಯೇನಪ್ಪಾ ಎಂದು ಅವರು ಕೇಳಿದೊಡನೆಯೇ ಈತ ಅದಕ್ಕೇನು ಸಾರ್ ಎಂದು ಒಪ್ಪಿಗೆ ಸೂಚಿಸಿಬಿಟ್ಟ. ತಮ್ಮ ಕೆಲಸ ಮುಗಿಸಿದ್ದಕ್ಕೆ ಅವರು ನಮಗೆ ವಿದಾಯ ಹೇಳಿ ಹೊರಟುಬಿಟ್ಟರು.

ಬೈಕನ್ನೊಮ್ಮೆ ಜೋರಾಗಿ ಅಲ್ಲಾಡಿಸಿ ಟ್ಯಾಂಕಿನ ಹತ್ತಿರ ಕಿವಿ ಹಿಡಿದ. ಆಮೇಲೆ ತನ್ನಷ್ಟಕ್ಕೆ ತಾನೇ ತಲೆ ಅಲ್ಲಾಡಿಸಿ ನಮ್ಮ ಕಡೆ ನೋಡಿದ. "ವಿದ್ಯಾಗಿರೀಗೆ ಹೊಂಟೀರೇನ್ರಿ? ಬರ್ರಿ...". ನಾನು ಮಧ್ಯದಲ್ಲಿ ಕೂತೆ. ನನ್ನ ಹಿಂದೆ ಪವನ. ಅವನ ಕಟಾರಾ ಸುಜುಕಿ ಸಮುರೈನಲ್ಲಿ ನಮ್ಮ ತ್ರಿಬಲ್ ರೈಡಿಂಗ್ ಶುರುವಾಯಿತು. "ನೋಡ್ರೀ... ನಾನು ಈಗss ಹೇಳಾಕತ್ತೀನಿ. ಘಟ್ಟಿ ಕೂತ್ಗೋರಿ. ನಾನು ನಶಾದಾಗದೀನಿ" ಎಂದುಬಿಟ್ಟ. ನನ್ನ ಜಂಘಾಬಲವೇ ಉಡುಗಿಹೋಯಿತು. ಕಣ್ಣು ಮುಚ್ಚಿ ರಾಮ ಕೃಷ್ಣ ಹೇಳಲು ಪ್ರಾರಂಭಿಸಿದೆ. ಕೆಲವೇ ಸೆಕಂಡುಗಳಲ್ಲಿ ಬೈಕು 60km/h ಸ್ಪೀಡಿಗೆ ಹೋಗಿ ಮುಟ್ಟುಬಿಟ್ಟಿತ್ತು. ಅಲ್ಲಿಯ ರೋಡಿನ ಪರಿಸ್ಥಿತಿಯೋ ಕೇಳುವುದು ಬೇಡ. ಆ ರೋಡಿನಲ್ಲಿ ಇವನ ಕಟಾರಾ ಬೈಕು ಆ ಸ್ಪೀಡಿನಲ್ಲಿ ತ್ರಿಬಲ್ ರೈಡಿಂಗ್ ಬೇರೆ. ಬೈಕಿನ ಶಾಕ್ ಅಬ್ಸಾರ್ಬರ್ಸ್ ಪೂರ್ತಿ ಅಕ್ಕಿಹೋಗಿತ್ತು. ಎಲ್ಲಾದರೂ ಹೊಂಡ ಹಾರಿಸಿದರೆ ಕಟಾರ್ ಎಂದು ಶಬ್ದ ಬೇರೆ ಬರುತ್ತಿತ್ತು. ಅವನಿಗಂತೂ ಇದೆಲ್ಲದರ ಪರಿವೆಯೇ ಇಲ್ಲವೇನೊ ಎಂಬಂತೆ ಓಡಿಸುತ್ತಿದ್ದ. ಅರ್ಧ ದಾರಿ ಸಾಗಿದ ಮೇಲೆ ಪ್ರಶ್ನೋತ್ತರಗಳನ್ನು ಶುರುಮಾಡಿದ.
"ಏನ್ ಮಾಡ್ಕೊಂಡದೀರಿ?"
"ಇಂಜಿನಿಯರಿಂಗ್ ಕಲ್ಯಾಕತ್ತೀವ್ರಿ"
"ಯಾವ ಬ್ರಾಂಚು?"
"ಕಂಪ್ಯೂಟರ್ ಸೈನ್ಸ್‌ರಿ"
"ಓಹ್... ಹಂಗಾರss ಅನಾಮಿ ಗೊತ್ತೇನ್ ನಿಮ್ಗ?"
ಯಲಾ ಇವ್ನಾ, ಹೋಗಿ ಹೋಗಿ ನಮ್ಮ HODಸುದ್ದೀಗೆ ಕೈ ಹಾಕಿದ್ನಲ್ಲಪ್ಪಾ ಎಂದುಕೊಳ್ಳುವಷ್ಟರಲ್ಲಿ ಅವನೇ ಮುಂದುವರಿಸಿದ.
"ಅವ ಮತ್ತ ನಾನು ಭಾರೀ ದೋಸ್ತ್... ನಿಮ್ಗೇನಾರ ಪ್ರಾಬ್ಲಮ್ ಆದ್ರ ನಂಗ್ ಹೇಳ್ರಿ. ನಾನು ಅನಾಮಿಗೆ ಹೇಳ್ತೀನಿ"
ಕೃತಾರ್ಥರಾದೆವು ತಂದೆ. ಮೊದಲು ದಯವಿಟ್ಟು ಮನೆಗೆ ತಲುಪಿಸಿಬಿಡು ಎಂದು ಬಾಯಿ ಬಿಟ್ಟು ಹೇಳುವುದೊಂದು ಬಾಕಿ ಇತ್ತು.
"ಅಂದಾಂಗ... ಈಗೀಗ ಬಾಗಲ್ಕೋಟ್ನಾಗ ಭಾಳ್ ಸೆಕಿ ಶುರು ಆಗ್ಬಿಟೈತಿ ನೋಡ್ರಿ. ಮನ್ಯಾಗ ಕುಂದ್ರಾಕಾಗಾಂಗಿಲ್ಲ. ಅದ್ಕss ಸೊಲ್ಪ ಹವಾ ಸೇವ್ಸೂನೂ ಅಂತ ಗಾಡಿ ಓಡ್ಸಾಕತ್ತೀನಿ" ಎಂದು ತನ್ನ ಸಮಸ್ಯೆಯನ್ನು ವಿವರಿಸಿದ. ನಾವು ಹುಂ ಹುಂ ಎಂದು ತಲೆ ಹಾಕಿದೆವು.

ಅಂತೂ ಕಾಲೇಜು ತಲುಪಿದಾಗ ಹೋದ ಜೀವ ಮತ್ತೆ ಬಂದಂತಾಗಿತ್ತು. ಇಲ್ಲೇ ಬಿಡಿ ಸಾಕು ಎಂದು ಎಷ್ಟು ಹೇಳಿದರೂ ಕೇಳದೆ ರೋಮಿಗೇ ತಂದು ಮುಟ್ಟಿಸಿದ. "ಏನಾರ ಹೆಲ್ಪ್ ಬೇಕಿದ್ರೆ ಕೇಳ್ರಿ... ನಾನು ನಿಮ್ಮ HODಗೆ ಹೇಳ್ತೀನಿ... ಗುಡ್ ನೈಟ್" ಎಂದು ಹೇಳಿ ಬೀಳ್ಕೊಟ್ಟ. ಎಚ್ಚರವಾಗಿದ್ದವ ದುಡ್ಡು ತೆಗೆದುಕೊಂಡೂ ಮಾಡದೇ ಇದ್ದ ಸಹಾಯವನ್ನ ನಿಶೆಯಲ್ಲಿದ್ದವ ಪ್ರತಿಫಲವನ್ನೇ ನಿರೀಕ್ಷಿಸದೆ ಮನಃಪೂರಕವಾಗಿ ಮಾಡಿಮುಗಿಸಿದ್ದ.

9 comments:

ದೀಪಕ said...

ಚಲೋ ಅತ್ರಿ ಲೇಖನ..... ನಾನು ಕೂಡ ಲೇಖನ ಓದುವಾಗ ಘಟ್ಟಿಯಾಗಿ ಕೂತಿದ್ದೆ !



- ದೀಪಕ

Vijayalakshmi said...

Nice one, thanks for sharing ur memories

C.A.Gundapi said...

Baari Baredderi nodri Siddu avara ..
Hinga Baritha iri ..

ಸಿದ್ಧಾರ್ಥ said...

@deepak, viji, gundapi
Dhanyavaadagalu... heege banduhogtaa iri.

Karna Natikar said...

ನಿನ್ನ ಅನಿಭವಗಳನ್ನು ಹೀಗೆ ಬರಿತ ಇರು, ಆಮೆಲೆ Acemap ಪಬ್ಲಿಕೇಶನ್ ದಿಂದ ಒಂದು ಪುಸ್ತಕ ಬಿಡುಗಡೆ ಮಾಡೋಣ, ಭಾಳಾ ಛೊಲೊ ಬರಿತಿ ಯಪ್ಪಾ ನೀ.

ಸಿದ್ಧಾರ್ಥ said...

@karna
thanksರೀ ಯಪ್ಪಾ... ಹಿಂಗss ಬಂದ್ ಹೋಗ್ತಿರ್ರಿ...

Anonymous said...

ಭಾಳ ದಿನಾ ಆತು...ಕನ್ನಡದೊಳಗ ಏನೂ ಒದಿಲ್ಲ ಅಂಥೇಳಿ ಅಂತರ್ಜಾಲದೊಳಗ ಹುಡಕ್ಯಾಡು-ಹೊತ್ನ್ಯಾಗ ನಿಮ್ಮ ’ಘಟ್ಟಿ ಕೂತ್ಕೋರಿ’ ಕಣ್ಣಿಗೆ ಬಿತ್ತು. ನಿಮ್ಮ ಬರಿಯೂ ಶೈಲಿ ಭಾಳ ಛೊಲೋ ಅದ. ಹಿಂಗ ಬರ್ಕೋಂತ ಇರ್ರಿ....

....ಅಶೋಕ ಹಂದಿಗೋಳ
(ಕ್ಯಾಲಿಫೋರ್ನಿಯ)

ಸಿದ್ಧಾರ್ಥ said...

@ಅಶೋಕ
ನಿಮ್ಮ ಕಮೆಂಟ್ ನೋಡಿ ಭಾಳ್ ಖುಷಿ ಆತು ನೋಡ್ರಿ. ಅದಕ್ಕ ತುಂಬಾ ತುಂಬಾ ಟ್ಯಾಂಕ್ಸ್. ಹಿಂಗ ಬಂದ್ ಹೋಗ್ತಿರ್ರಿ...

Durga Das said...

kudukarigintha kedukarilla , mattu awariginta olleyawarilla :)
- nim kathena tumba chenaagi, kannige kattuva haage helidiri :)

bolo katara bike ki JAI.. :)
bolo Katara bike owner ki JAI.. :)
bolo Siddu maharaaj ki JAI.. :)